ದರ್ಶನ್‌, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ಕೋರ್ಟ್ ವಜಾಗೊಳಿಸಿದೆ.

ಎರಡೂ ಕಡೆಯವರ ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅ.10 ರಂದು ವಿಚಾರಣೆ ಪೂರ್ಣಗೊಳಿಸಿ ಅ. 14ಕ್ಕೆ ಜಾಮೀನು ಅರ್ಜಿ ಸಂಬಂಧ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.

ರೇಣುಕಾಸ್ವಮಿ ಕೊಲೆ ಪ್ರಕರಣದಲ್ಲಿ ಜೂನ್‌ 11ರಂದು ದರ್ಶನ್ ಅವರನ್ನು ಬಂಧಿಸಲಾಗಿದ್ದು ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಪರ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಪ್ರಸನ್ನಕುಮಾರ್‌ ಅವರು ವಾದ ಮಂಡಿಸಿದರೆ,ದರ್ಶನ್‌ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು.

ದರ್ಶನ್ ಸೇರಿ ನಾಲ್ವರಿಗೆ ಜಾಮೀನು ಮಂಜೂರು ಮಾಡದಂತೆ ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ್ದರು.