ಜೈಲಿಗೆ ಹೋಗಿ ಬಂದವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ; ಡಿಕೆಶಿಗೆ ಈಶು ಟಾಂಗ್

ಮೈಸೂರು: ಡಿ. ಕೆ. ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ತಿಹಾರ್ ಜೈಲಿಗೆ ಹೋಗಿ ಬಂದಿರುವವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ  ಟಾಂಗ್ ನೀಡಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿದರು.

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ವೇಳೆ ಕೋಟ್ಯಾಂತರ ರೂ ಪತ್ತೆಯಾಗಿರುವ ವಿಚಾರ‌ಕ್ಕೆ ಸಂಬಂಧಿಸಿದಂತೆ  ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು  ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಗ್ರಹಿಸಿದ್ದಕ್ಕೆ ಈಶ್ವರಪ್ಪ ಟಾಂಗ್ ನೀಡಿದರು.

ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆ. ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ, ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್ ಸಿ, ಎಸ್ ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ.

ಹಿಂದುಳಿದ ವರ್ಗ ಹಾಗು ದಲಿತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ,ಇದರ ಪರಿಣಾಮ ವಿಜಯ ಸಂಕಲ್ಪ ಯಾತ್ರೆಗೆ ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿದೆ,ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ನವರಿಗೆ ಹಣ ಕೊಟ್ಟು ಜನರನ್ನು ಕರೆಸುವುದು ಅಭ್ಯಾಸವಾಗಿದೆ. ಹಾಗಾಗಿ ಬಿಜೆಪಿಯವರು ಹಣ ಕೊಟ್ಟು ಜನರನ್ನು ಕರೆಸುತ್ತಿದ್ದಾರೆಂದು ಹೇಳುತ್ತಿದ್ದಾರೆ.

500 ರೂಪಾಯಿ ಕೊಟ್ಟು ಜನರನ್ನು ಸಭೆಗೆ ಕರೆ ತರುವಂತೆ ಸಿದ್ದರಾಮಯ್ಯ ಹೇಳಿರುವುದನ್ನು ಇಡೀ ದೇಶದ ಜನರು ನೋಡಿದ್ದಾರೆ. ಅವರ ಮೇಲೆ ಬಂದಿರುವ ತಪ್ಪನ್ನು ಮರೆಮಾಚಲು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಈಶ್ವರಪ್ಪ ಕಿಡಿಕಾರಿದರು.

ನರೇಂದ್ರ ಮೋದಿ, ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ನೇತೃತ್ವ, ಸಂಘಟನೆ ಹಾಗೂ ನಾವು ಮಾಡಿರುವ ಅಭಿವೃದ್ಧಿ, ಸಂಸ್ಕೃತಿ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾಂನಂದಗೌಡ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.