ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ -ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.

ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆ ಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದು, ಹೆಚ್ಚುವರಿ ಯಾಗಿ 140 ಕೋಟಿ ರೂ.ಗಳ ಜೊತೆಗೆ 70 ಕೋಟಿ ರೂ.ಗಳ ನ್ನು ಬಿಡುಗಡೆ ಮಾಡಲಾಗು ವುದು. ಇದು ಸರ್ಕಾರದಿಂದ ನೀಡುವ ಅನುದಾನವಾಗಿದೆ ಎಂದರು.

ಕರ್ನಾಟಕದಲ್ಲಿ ಈ ವರ್ಷ ಬರಗಾಲವಿದ್ದು, 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದು, 194 ತೀವ್ರ ಬರಗಾಲ ಪೀಡಿತವಾಗಿವೆ.
ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಎಂದು ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 854 ಕೋಟಿ ರೂ. ಲಭ್ಯವಿದೆ.

ಪ್ರತಿ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆದು ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಿದೆ. ಈವರೆಗೆ 646 ಸಭೆಗಳನ್ನು ಇಲ್ಲಿಯವರೆಗೆ ನಡೆಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ 307 ಸಭೆಗಳಾಗಿವೆ. ಕುಡಿಯುವ ನೀರಿಗೆ ತೊಂದರೆ ಯಾಗದಂತೆ ಕ್ರಮ ವಹಿಸಿದೆ ಎಂದರು.

ಸಮಸ್ಯೆಯಿರುವ ಗ್ರಾಮ, ಜಿಲ್ಲೆಗಳಲ್ಲಿ ಅದಕ್ಕೆ ಮುಂಚಿತವಾಗಿ ಯೋಜನೆ ತಯಾರಿಸಬೇಕು. ಸದ್ಯ 98 ತಾಲ್ಲೂಕುಗಳ 412 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 175 ಗ್ರಾಮಗಳಿಗೆ 204 ಟ್ಯಾಂಕರ್ ಗಳಿಂದ 596 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಆಗುತ್ತಿದೆ ಎಂದು ವಿವರಿಸಿದರು.

120 ಬಿಬಿಎಂಪಿ ಹಾಗೂ ಜಲಮಂಡಲಿಯಲ್ಲಿ 232 ಟ್ಯಾಂಕರ್ ಗಳಲ್ಲಿ ನೀರು ಸರಬರಾಜು ಆಗುತ್ತಿದೆ. 96 ವಾರ್ಡುಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಆಗುತ್ತಿದೆ ಎಂದರು.

ಕೆಲವೆಡೆ ಸರ್ಕಾರದ ಕೊಳವೆಬಾವಿಗಳನ್ನು ಆಳ ಮಾಡುವುದು, ಫ್ಲ್ಯಾಶಿಂಗ್ ಮಾಡುವುದು, ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯುವುದು, ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ಕ್ರಮ ವಹಿಸಿದೆ ಎಂದರು.

ಬಿಜೆಪಿ ನೇತೃತ್ವದಲ್ಲಿಯೇ ನಿಯೋಗ ಹೋಗೋಣವೆಂದರೆ ಬಿಜೆಪಿ ನಾಯಕರ ಉತ್ತರವಿಲ್ಲ. ಕೇಂದ್ರ ಸರ್ಕಾರ ಜಪ್ಪಯ್ಯ ಅಂದರೂ ಒಂದು ರೂ.ನೀಡಿಲ್ಲ. ಪರಿಹಾರ ನೀಡಿಲ್ಲ ಎನ್ನಲೂ ನಮಗೆ ಸ್ವಾತಂತ್ರ್ಯವಿಲ್ಲವೇ? ಎಂದರು.

ಅಧಿಕಾರಿಗಳು ವಾಚಕರ ವಾಣಿ, ಸಾಮಾಜಿಕ ಜಾಲತಾಣಗಳಲ್ಲಿ ವರದಿಯನ್ನು ಕಟ್ಟುನಿಟ್ಟಾಗಿ ಗಮನಿಸಿ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಸಹಾಯವಾಣಿ ಹಾಗೂ ಕಂಟ್ರೋಲ್ ರೂಮ್ ನ್ನು ಸ್ಥಾಪಿಸಬೇಕು ಎಂದು ಸೂಚಿಸಲಾಗಿದೆ.

ಟ್ಯಾಂಕರ್ ಮಾಲೀಕರು ಪರಿಸ್ಥಿತಿ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸಲು ಕ್ರಮ ವಹಿಸಲಾಗಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಗೂ ನೋಂದಣಿ ಮಾಡಿಸಿಕೊಂಡು ದರಗಳನ್ನು ನಿಯಂತ್ರಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.