ಹಗರಣ ವಿಷಯ ಮುಚ್ಚಲು ಸರ್ಕಾರದಿಂದ ದರ್ಶನ್ ರಾಜಾತಿಥ್ಯ ಫೋಟೋ ವೈರಲ್ -ಜೋಶಿ

ಹುಬ್ಬಳ್ಳಿ: ಹಗರಣ ವಿಷಯ ಮುಚ್ಚಿ ಹಾಕಲು ಸರ್ಕಾರವೇ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಫೋಟೋ ವೈರಲ್ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ಆದರೆ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ತನ್ನ ತಪ್ಪನ್ನು ಮುಚ್ಚಿ ಹಾಕಲು ರಾಜ್ಯದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ದರ್ಶನ್‌ ಪ್ರಕರಣ ಬಳಸಿಕೊಳ್ಳುತ್ತಿದೆ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಾಲ್ಮೀಕಿ ಹಾಗೂ ಮುಡಾ ಹಗರಣಗಳ ವಿಷಯಾಂತರ ಮಾಡಲು ನಟ ದರ್ಶನ್‌ ಕೇಸ್‌ ಮುನ್ನೆಲೆಗೆ ತಂದು ಸಂಕುಚಿತ ಷಡ್ಯಂತ್ರ ನಡೆಸಿದೆ.

ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಫೋಟೋಗಳನ್ನು ವೈರಲ್‌ ಮಾಡಿರುವ ಬಗ್ಗೆ ನ್ಯಾಯಾಲಯವೂ ಪರಿಗಣನೆಗೆ ತೆಗೆದುಕೊಂಡು ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಸಿಗುತ್ತಿದ್ದ ಫೋಟೋ ವೈರಲ್‌ ಆಗಿದ್ದು ಹೇಗೆ, ಇದಕ್ಕೆ ಪ್ರಮುಖ ಸೂತ್ರದಾರರು ಯಾರು ಎಂದು ಜೋಶಿ ಪ್ರಶ್ನಿಸಿದರು.

ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿದ ವರದಿ ಇಟ್ಟುಕೊಂಡು ತನಿಖೆಗೆ ಮುಂದಾಗಿರುವುದು ಅಚ್ಚರಿ ಉಂಟು ಮಾಡಿದೆ ಎಂದು ಇದೇ ವೇಳೆ ಅವರು ತಿಳಿಸಿದರು.

ಒಂದೂವರೆ ವರ್ಷದಿಂದ ಸುಮ್ಮನಿದ್ದ ಸರಕಾರ ಈಗ ಹಗರಣದ ಬಗ್ಗೆ ಮಾತನಾಡುತ್ತಿದೆ. ಸರಕಾರ ಕಳ್ಳತನ ಮಾಡಿ ಸಿಕ್ಕಿಬಿದ್ದಾಗ ಇನ್ನೊಬ್ಬರು ಕೂಡ ಕಳ್ಳತನ ಮಾಡಿದ್ದಾರೆ ಎಂದು ತೋರಿಸುತ್ತ ಬಚಾವಾಗುವ ತಂತ್ರವೇ ಎಂದು ಟೀಕಿಸಿದರು.