ಐಜಿಪಿ ಚಂದ್ರಶೇಖರ್ ಕ್ರಿಮಿನಲ್, ಬ್ಲ್ಯಾಕ್ ಮೇಲರ್-ಹೆಚ್ ಡಿ ಕೆ ಕಿಡಿ

ಬೆಂಗಳೂರು: ಐಜಿಪಿ ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೆ ಗೊತ್ತಿದೆ. ಉತ್ತರ ಕೊಡಬೇಕಾದ ಜಾಗದಲ್ಲೇ ಸರಿಯಾದ ಸಂದರ್ಭದಲ್ಲಿ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚತ ಡಿ ಕೆ,ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್, ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಆರೋಪಿಸಿದರು.

ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ನೀಡಿಲ್ಲ, ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು‌

ನಾನು ದಾಖಲೆ, ವಿಷಯ ಇಲ್ಲದೆ ಮಾತನಾಡುವುದಿಲ್ಲ. ಅಧಿಕಾರಿ ಬರೆದಿರುವ ಪತ್ರವನ್ನು ಚೆನ್ನಾಗಿ ಸಿದ್ಧ ಮಾಡಿಕೊಟ್ಟಿದ್ದಾರೆ. ನಾನು ಶನಿವಾರ ಬೆಳಗ್ಗೆ ಮಾಧ್ಯಮಗೋಷ್ಠಿ ಮಾಡಿದ ಮೇಲೆ, ಸಂಜೆ ಆ ಅಧಿಕಾರಿ ಎಲ್ಲಿ ಹೋಗಿದ್ದ ಎನ್ನುವುದು ಗೊತ್ತಿದೆ. ಪತ್ರವನ್ನು ಅಲ್ಲಿ ಯಾವ ಕಾನೂನು ಪಂಡಿತರು ರೆಡಿ ಮಾಡಿಕೊಟ್ಟರು, ಅವರೊಂದಿಗೆ ಯಾರಿದ್ದರು ಎನ್ನುವುದೆಲ್ಲಾ ಗೊತ್ತಿದೆ ಎಂದು ಹೇಳಿದರು.

ನಾನು ದಾಖಲೆ ಇಟ್ಕೊಂಡೇ ನಿನ್ನೆ ಮಾತಾಡಿದ್ದೇನೆ. ಈತ ಆಂಧ್ರ ಪ್ರದೇಶ ಮೂಲದವನು, ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿ 25 ವರ್ಷಗಳಿಂದ ಇಲ್ಲಿದ್ದಾರೆ. ಯಾರು ಯಾರನ್ನು ಹಿಡಿದು ಇಲ್ಲಿಗೆ ಬಂದಿದ್ದಾರೆ, ಆತ ಬಳಕೆ ಮಾಡಿರುವ ಭಾಷೆ ಆತನ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು ಕುಮಾರಸ್ವಾಮಿ

ಪತ್ರದಲ್ಲಿ ಸತ್ಯಮೆಯ ಜಯತೆ ಎಂದು ಆತ ಬರೆದಿದ್ದಾರೆ. ನಾನು ಹೋರಾಟ ಮಾಡುತ್ತಿರುವುದು ಕೂಡ ಅದೇ ಉದ್ದೇಶಕ್ಕೆ. ಶನಿವಾರ ಅಷ್ಟು ದಾಖಲೆಗಳ ಸಮೇತ ಈ ವ್ಯಕ್ತಿ ಬಗ್ಗೆ ಹೇಳಿದ್ದು ಕೂಡ ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ಹೇಳಿದರು.

ಪೊಲೀಸ್ ಠಾಣೆಗೆ ಈ ಅಧಿಕಾರಿ ವಿರುದ್ಧ ನಾನು ದೂರು ಕೊಟ್ಟಿದ್ದೀನಾ? ಅವರ ಕೈಕೆಳಗೆ ಕೆಲಸ ಮಾಡುವ ಇನ್ಸ್ಪೆಕ್ಟರ್ ಗೆ 20 ಕೋಟಿ ಡಿಮ್ಯಾಂಡ್ ಇಟ್ಟು ಸಿಕ್ಕಿಬಿದ್ದಿದ್ದಾನೆ. ಆ ಇನ್ಸ್ಪೆಕ್ಟರ್ ಈ ಅಧಿಕಾರಿ ವಿರುದ್ಧ ದೂರು ನೀಡಿದ್ದಾರೆ ಇದೇನಾ ಸತ್ಯಮೇವ‌ಜಯತೆ ಎಂದು ಕಾರವಾಗಿ ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪಟಾಲಂಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ಮೆಚ್ಚಿಸಲು ನಾನು ರಾಜೀನಾಮೆ ಕೊಡಬೇಕಾ, ನಾನು ತಪ್ಪು ಮಾಡಿಲ್ಲ, ತಪ್ಪು ಮಾಡಿಲ್ಲ ಅಂದ್ಮೇಲೆ ರಾಜೀನಾಮೆ ಯಾಕೆ ಕೊಡಲಿ ಎಂದು ಕುಮಾರಸ್ವಾಮಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.