ಮೈಸೂರು: ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಬಳಿ ಘಟನೆ ನಡೆದಿದ್ದು,ಮಹಜರ್ ನಡೆಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿ ಆಗಲು ಯತ್ನಿಸಿದ ಹಿನ್ನಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ.
ಆರೋಪಿ ನಡೆಸಿದ ದಾಳಿಯಲ್ಲಿ ಸಬ್ ಜಯಪುರ ಠಾಣೆ ಸಬ್ಇನ್ಸ್ಪೆಕ್ಟರ್ ಪ್ರಕಾಶ್
ಮತ್ತು ಕಾನ್ಸ್ಟೇಬಲ್ ಗಾಯಗೊಂಡಿದ್ದಾರೆ.
ಕೇರಳಾ ಮೂಲದ ಆರೋಪಿ ಆದರ್ಶ್ ನನ್ನು ಹಿಡಿಯಲಾಗಿದೆ.
ಕೆಲ ದಿನಗಳ ಹಿಂದೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆರೋಹಳ್ಳಿ ಬಳಿ ಹಾಡುಹಗಲೇ ಕೇರಳ ಮೂಲದ ಉದ್ಯಮಿಯನ್ನ ಅಡ್ಡಗಟ್ಟಿ ದರೋಡೆ ನಡೆಸಲಾಗಿತ್ತು.
ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಪೊಲೀಸರು ಈಗಾಗಲೇ 3 ಆರೋಪಿಗಳನ್ನ ಬಂಧಿಸಿದ್ದಾರೆ.ಇನ್ನೂ ಮೂವರು ಆರೋಪಿಗಳನ್ನ ಕೇರಳಾದಲ್ಲಿ ಬಂದಿಸಲಾಗಿದ್ದು ಈ ಪೈಕಿ ಆದರ್ಶ್ ಸಹ ಒಬ್ಬ.
ದರೋಡೆ ನಡೆದ ಸ್ಥಳದ ಬಳಿ ಪೊಲೀಸರಿಗೆ ಕ್ವಾಲಿಸ್ ಕಾರು ದೊರೆತಿತ್ತು.ಇದರ ಮಾಲೀಕ ಆದರ್ಶ್ ಎಂದು ಪತ್ತೆಹಚ್ಚಲಾಗಿತ್ತು.ಆದರ್ಶ್ ಹಾಗೂ ಸಂಗಡಿಗರ ಬಂಧನಕ್ಕೆ ಸಾಕಷ್ಟು ಕಸರತ್ತು ನಡೆಸಿದ್ದ ಜಿಲ್ಲಾ ಪೊಲೀಸರಿಗೆ ಬಂಧನ ಸವಾಲಾಗಿತ್ತು.ಕೊನೆಗೂ ಆದರ್ಶ್ ಪೊಲೀಸರ ಬಲೆಗೆ ಬಿದ್ದಿದ್ದ.
ಈತನ ಕಾರು ದೊರೆತ ಸ್ಥಳಕ್ಕೆ ಮಹಜರ್ ನಡೆಸುವ ಸಲುವಾಗಿ ಜಯಪುರ ಸಬ್ ಇನ್ಸ್ಪೆಕ್ಟರ್ ಪ್ರಕಾಶ್,ಪಿರಿಯಾಪಟ್ಟಣ ಸಿಪಿಐ ದೀಪಕ್ ಹಾಗೂ ಇಬ್ಬರು ಸಿಬ್ಬಂದಿಗಳು ಕರೆದೊಯ್ದಿದ್ದಾರೆ.ಕಾರು ಪತ್ತೆಯಾದ ಸ್ಥಳವನ್ನ ಆದರ್ಶ್ ಗುರುತಿಸಿದ್ದಾನೆ.ನಂತರ ಮೂತ್ರವಿಸರ್ಜನೆ ನೆಪವೊಡ್ಡಿ ರಸ್ತೆ ಬದಿಯಲ್ಲಿ ನಿಂತು,ಯಾರೋ ಕುಡಿದು ಬಿಸಾಕಿದ್ದ ಬಿಯರ್ ಬಾಟಲಿಯನ್ನ ಒಡೆದು ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ಹಾಗೂ ಸಿಬ್ಬಂದಿ ಹರೀಶ್ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.
ಪ್ರಕಾಶ್ ರವರು ಸಾಕಷ್ಟು ಬಾರಿ ಶರಣಾಗುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ,ಈ ವೇಳೆ ಜೊತೆಯಲ್ಲಿದ್ದ ಇನ್ಸ್ಪೆಕ್ಟರ್ ದೀಪಕ್ ಆತ್ಮರಕ್ಷಣೆಗಾಗಿ ತಮ್ಮಲ್ಲಿದ್ದ ಪಿಸ್ತೂಲ್ ನಿಂದ ಆದರ್ಶ್ ಮೇಲೆ ಗುಂಡು ಹಾರಿಸಿದ್ದಾರೆ.ಆದರ್ಶ್ ಎಡಗಾಲಿಗೆ ಗುಂಡು ತಗುಲಿ ಬಿದ್ದಿದ್ದಾನೆ.
ಗಾಯಗೊಂಡ ಪ್ರಕಾಶ್ ಹಾಗೂ ಹರೀಶ್ ರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಆದರ್ಶ್ ನನ್ನು ಮೇಟಗಳ್ಳಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಎಸ್ಪಿ ವಿಷ್ಣುವರ್ಧನ್,ಅಡಿಷನಲ್ ಎಸ್ಪಿ ಮಲ್ಲಿಕ್,ಡಿವೈಎಸ್ಪಿ ಕರೀಂ ರಾವ್ ತರ್,ಸರ್ಕಲ್ ಇನ್ಸ್ಪೆಕ್ಟರ್ ಶೇಖರ್ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಜಯಪುರ ಪೊಲೀಸರು ಈ ಸಂಭಂಧ ಪ್ರಕರಣ ದಾಖಲಿಸಿದ್ದಾರೆ.