ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ

ನವದೆಹಲಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ವಿಜಯಪುರ ಶಾಸಕ ಯತ್ನಾಳ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧ ಮೊದಲಿನಿಂದಲೂ ನಾಲಗೆ ಹರಿಬಿಡುತ್ತಲೇ ಇದ್ದಾರೆ. ಅಲ್ಲದೆ, ರಾಜ್ಯಾಧ್ಯಕ್ಷರ ಬಗ್ಗೆ ಅವಹೇಳನವಾಗಿ ಮಾತನಾಡಿದ ಹಿನ್ನೆಲೆ ಅವರಿಗೆ ನೋಟಿಸ್ ಕೊಡಲಾಗಿತ್ತು.

ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಪಕ್ಷದಿಂದ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ.

ಯತ್ನಾಳ್‌ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್‌ ನೀಡಿತ್ತು. ನೋಟಿಸ್‌ ನೀಡಿದ್ದರೂ ಕೂಡ ಪದೇ ಪದೇ ಪಕ್ಷ ವಿರೋಧಿ ಚಟುವಟಿಕೆ, ಶಿಸ್ತು ಉಲ್ಲಂಘನೆ ಮಾಡುತ್ತಲೇ ಇದ್ದರು.

ಕೊನೆಗೆ 2025 ಫೆಬ್ರವರಿ 10ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಇಂದು ಈ ನಿರ್ಧಾರವನ್ನು ಕೈಗೊಂಡಿದೆ.

ಪದೇ ಪದೇ ನೀವು ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿರು ವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಅಲ್ಲದೆ, ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.