ಬೆಂಗಳೂರು: ರಾಜ್ಯದಲ್ಲಿ ದರ ಬೀಜಾಸುರ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೂ ಸೆಸ್ ವಿಧಿಸುವ ಮೂಲಕ ಜನರ ರಕ್ತ ಹೀರುತ್ತಿದೆ ಎಂದು ಟೀಕಿಸಿದ್ದಾರೆ.
ರಾಜ್ಯ ಸರಕಾರ ದಿನಕ್ಕೊಂದು ಸುಳ್ಳು ಹೇಳುತ್ತಿದೆ. ತಿಂಗಳಿಗೊಂದು ದರ ಏರಿಕೆ ಮಾಡುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು ಎಂದು ಲೇವಡಿ ಮಾಡಿದ್ದಾರೆ.
ದರ ಏರಿಕೆಗೆ ಪಂಚ ಗ್ಯಾರೆಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ ಜನರ ಲೂಟಿ ಮಾಡುವುದಷ್ಟೇ. ಭಾರತದ ಮೇಲೆ ಆಕ್ರಮಣ ನಡೆಸಿ ನಿರಂತರ ಲೂಟಿ ಮಾಡಿದ ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಅವರಿಬ್ಬರೂ ನಾಚುವಂತೆ ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ ಎಂದು ಕುಮಾರಸ್ವಾಮಿ ವ್ಯಂಗ್ಯ ವಾಡಿದ್ದಾರೆ
ನೀರು, ಮೆಟ್ರೋ ರೈಲು, ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ. ಇದು ದರ ಬೀಜಾಸುರ ಕಾಂಗ್ರೆಸ್ ಸರಕಾರ ಎಂದು ಆರೋಪಿಸಿದ್ದಾರೆ.
ಇಷ್ಟು ಸಾಲದೆಂಬಂತೆ ಜನರ ಮೇಲೆ ಏಪ್ರಿಲ್ 1ರಿಂದ ಕಸದ ಸೆಸ್ ಹೇರುತ್ತಿದೆ ಈ ದರಬೀಜಾಸುರ ಸರಕಾರ ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹಾಕಿಕೊಂಡಿದೆ ಎಂದು ಹೆಚ್ ಡಿ ಕೆ ಟೀಕಿಸಿದ್ದಾರೆ.