ಅಮೂಲ್‌ ಉತ್ಪನ್ನ ಮಾರಾಟದ ವಿಚಾರ; ಕಾಂಗ್ರೆಸ್‌ ರಾಜಕೀಯ ಗೊಳಿಸಿದೆ -ಸುಧಾಕರ್

ಬೆಂಗಳೂರು: ನಂದಿನಿ ಉತ್ಪನ್ನಗಳು ಬೇರೆ ರಾಜ್ಯ ಹಾಗೂ ದೇಶಗಳಲ್ಲೂ ಮಾರಾಟವಾಗುತ್ತಿದ್ದು, ಯಾವುದೇ ಸ್ಪರ್ಧೆ ಎದುರಿಸಲು ಸಿದ್ಧವಾಗಿವೆ ಎಂದು ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಅಮೂಲ್‌ ಉತ್ಪನ್ನಗಳ ಮಾರಾಟದ ವಿಚಾರವನ್ನು ಕಾಂಗ್ರೆಸ್‌ನವರು ರಾಜಕೀಯಗೊಳಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುಧಾಕರ್, ನಂದಿನಿ ಉತ್ಪನ್ನಗಳು ನಮ್ಮ ರಾಜ್ಯದ ಹೆಮ್ಮೆಯಾಗಿದೆ ಎಂದು ಹೇಳಿದರು.

ಹಿಂದಿನ ಸಿಎಂ ಬಿ.ಎಸ್‌.ಯಡಿಯೂರಪ್ಪನವರು ಮೊದಲ ಬಾರಿಗೆ ರೈತರಿಗೆ 2 ರೂ. ಪ್ರೋತ್ಸಾಹ ಧನ ನೀಡಿದ್ದರು. ಈಗ 5 ರೂ. ನೀಡಲಾಗುತ್ತಿದೆ. ಅಂದರೆ ನಂದಿನಿಗೆ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ಬೆಂಬಲ ನೀಡಿದೆ ಎಂದು ತಿಳಿಸಿದರು.

ಯಾವುದೇ ಉತ್ಪನ್ನ ಯಾವುದೇ ಭಾಗಗಳಲ್ಲಿ ಮಾರಾಟವಾಗಬಹುದು. ಆದರೆ ಕಾಂಗ್ರೆಸ್‌ನವರು ಇದನ್ನು ರಾಜಕೀಯವಾಗಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 16 ರಿಂದ 18 ಕಂಪನಿಗಳು ತಮ್ಮ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ, ಆಗ ಇವರಿಗೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ಅಮೂಲ್‌ ಕಂಪನಿ ತನ್ನ ಉತ್ಪನ್ನ ಮಾರಾಟ ಮಾಡಲು ಮುಂದಾದಾಗ ಮಾತ್ರ ಸಮಸ್ಯೆ ಆರಂಭವಾಗಿದೆ ಎಂದು ಗುಲ್ಲೆಬ್ಬಿಸಿದ್ದಾರೆ ಎಂದು ಟೀಕಿಸಿದರು.

ವಿದೇಶಗಳಲ್ಲೂ ನಂದಿನಿ ಉತ್ಪನ್ನ ಮಾರಾಟವಾಗುತ್ತಿದೆ, ಕಾಂಗ್ರೆಸ್‌ನವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಈಗ ಕೋವಿಡ್‌ ನಿಯಂತ್ರಣದಲ್ಲಿದೆ. ಆದರೆ ಜನರು ಮೂರನೇ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು. ಜೊತೆಗೆ ಜನಸಂದಣಿಯ ಪ್ರದೇಶಗಳಿಗೆ ಹೋಗಬಾರದು, ಮಾಸ್ಕ್‌ ಧರಿಸಬೇಕು ಎಂದು ಇದೇ ವೇಳೆ ಸುಧಾಕರ್ ಸಲಹೆ ನೀಡಿದರು.