ಬರಗಾಲ ನಿರ್ವಹಿಸುವಲ್ಲಿ ಸರಕಾರ ವಿಫಲ:ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಬರಗಾಲ ನಿರ್ವಹಿಸುವಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಶನಿವಾರ ಅವರು ವಿಕಸಿತ ಭಾರತ ಎಲ್.ಇ.ಡಿ ಪ್ರಚಾರ ವಾಹನಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಭೀಕರ ಬರಗಾಲ ಇದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬರದ ಸಮಸ್ಯೆಯಿಂದ ಕುಡಿಯುವ ನೀರಿಗೂ ಹಾಹಾಕಾರ ಇದೆ, ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂದು ಆರೋಪಿಸಿದರು.

ಕಾಳಜಿ ಇಲ್ಲದ ಸರಕಾರ ಇದು, ದರಿದ್ರ ಸರಕಾರ ಎಂದು ಸಾಮಾನ್ಯ ಜನರು ಹೇಳುತ್ತಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ನಗರ ಜಿಲ್ಲಾಧ್ಯಕ್ಷರಿಗೆ ತಿಳಿಸಿದ್ದೇನೆ ಎಂದು ವಿಜಯೇಂದ್ರ ತಿಳಿಸಿದರು.

ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ತಮ್ಮನ್ನು ಸೀಮಿತಗೊಳಿಸಿದ್ದಾರೆ,
ಬೆಂಗಳೂರಿನ ನೀರಿನ ಸಮಸ್ಯೆಯತ್ತ ಗಮನ ಕೊಡುತ್ತಿಲ್ಲ ಕುಡಿಯುವ ನೀರಿನ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು.