ಬಿಜೆಪಿಯ ಕುತಂತ್ರದಿಂದ ಬಿಎಸ್ ವೈ ಮನೆ ಮೇಲೆ ದಾಳಿ -ಡಿಕೆಶಿ

ಬೆಂಗಳೂರು: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಗೊಂದಲ ಮೂಡಿಸಿರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ಹೇಳಿದರು.

ಜನ ತಮಗೆ ಅನ್ಯಾಯ ಆದಾಗ ಅಧಿಕಾರದಲ್ಲಿರುವವರ ಮೇಲೆ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು, ಸಚಿವರ ಮನೆ ಮೇಲೆ ದಾಳಿ ಆಗದೆ ಯಾವುದೇ ಅಧಿಕಾರ ಇಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಆಗಿದೆ ಎಂದರೆ ಇದು ಬಿಜೆಪಿಯ ಕುತಂತ್ರಕ್ಕೆ ಸಾಕ್ಷಿಯಲ್ಲವೆ ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿಯವರು ದೂರುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಯಡಿಯೂರಪ್ಪ ಅವರ ಮನೆಗೆ ಹೋಗಿ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಮೀಸಲಾತಿ ವಿಚಾರ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಗೊಂದಲ ಮೂಡಿಸಿದೆ. ಬೇರೆ ರಾಜ್ಯಗಳಲ್ಲಿ ಈಗಾಗಲೇ ಇಂತಹ ಗೊಂದಲದ ಮೀಸಲಾತಿ ತಂದಾಗ ಅದರ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ.

ಆದರೂ ಈ ಸರ್ಕಾರ ಜನರಿಗೆ ವಂಚಿಸಲು ಹೊರಟಿದೆ, ಇಬ್ಬರು ಸಚಿವರೇ ಕುಳಿತು ಸುಳ್ಳು ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದ್ದಾರೆ.

ಯಾವ ವರದಿ ಆಧಾರದ ಮೇಲೆ ಸರ್ಕಾರ ಈ ತೀರ್ಮಾನ ಮಾಡಿದೆ, ಹಿಂದುಳಿದ ವರ್ಗಗಳ ಆಯೋಗ ಕಳೆದ ಡಿಸೆಂಬರ್ ನಲ್ಲಿ ನೀಡಿದ ಮಧ್ಯಂತರ ವರದಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಎಂದು ತಿಳಿಸಿದೆಯೇ ಎಂದು ಖಾರವಾಗಿ ಡಿಕೆಶಿ ಪ್ರಶ್ನಿಸಿದರು.

ಕೇವಲ ಚುನಾವಣೆ ಗಿಮಿಕ್ ಮಾಡಲು ಏಕಾಏಕಿ ಆದೇಶ ನೀಡಿದರೆ ಜಾರಿಗೆ ಬರುವುದಿಲ್ಲ. ಅಲ್ಪಸಂಖ್ಯಾತರ ಮೀಸಲಾತಿ ಕಸಿದು ನಮಗೆ ನೀಡಿ ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸ್ವಾಮೀಜಿಗಳು ಕೇಳಿದ್ದರೇ.

ಒಕ್ಕಲಿಗರು ಹಾಗೂ ಲಿಂಗಾಯತರು ತಮ್ಮ ಜನಸಂಖ್ಯೆ ಆಧಾರದ ಮೇಲೆ ಕ್ರಮವಾಗಿ 12% ಹಾಗೂ 15% ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದರು. ಮುಸಲ್ಮಾನರಿಂದ ಕಸಿದು 2% ಮೀಸಲಾತಿಗೆ ಬೇಡಿಕೆ ಇಟ್ಟಿರಲಿಲ್ಲ ಎಂದು ಹೇಳಿದರು.

ಮಾಡಾಳ ವಿರೂಪಾಕ್ಷಪ್ಪ ಅವರ ಬಂಧನದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಲೋಕಾಯುಕ್ತ ಪೊಲೀಸರು ಕಾನೂನಿನ ಪ್ರಕಾರ ಕರ್ತವ್ಯ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮನ್ನು ಸಂಪರ್ಕಿಸಿವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಶಿವಕುಮಾರ್ ಪ್ರತಿಕ್ರಿಯಿಸಿ ಇದು ಸುಳ್ಳು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್  ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ. ಯಾರ ಬೆಂಬಲವನ್ನು ಪಡೆಯುವ ಅಗತ್ಯವಿಲ್ಲ. ಅವರನ್ನು ಯಾರು ಸಂಪರ್ಕಿಸಿದ್ದರು ಅವರ ಹೆಸರನ್ನು ಬಹಿರಂಗಪಡಿಸಲಿ ಎಂದು ಹೇಳಿದರು.