ಕೆಪಿಎಸ್ ಸಿ ಮರು ಪರೀಕ್ಷೆ: ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂದಿದೆ-ಅಶೋಕ್

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಸರ್ಕಾರದ ಈ ನಿರ್ಧಾರ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಮತ್ತು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ, ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಸರ್ಕಾರ ಎಚ್ಚೆತ್ತುಕೊಂಡು ಮರು ಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆ ಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ ಪರಿಗಣಿಸಿ ತಪ್ಪುಗಳು,ಲೋಪದೋಷಗಳು ಮರುಕಳಿಸದಂತೆ ಜಾಗರೂಕತೆಯಿಂದ ಪರೀಕ್ಷೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.

ಕೆಪಿಎಸ್ ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾ ಕಾಂಕ್ಷಿಗಳ ಭವಿಷ್ಯದ ಪ್ರಶ್ನೆಯಾಗಿದೆ,ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು, ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಗೆ ಸೇರಿಸಬೇಕು ಮರು ಪರೀಕ್ಷೆ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಿ ಎಂದು ಅಶೋಕ್ ಹೇಳಿದ್ದಾರೆ.