ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ದಾಳಿ

ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ.

ವೈಯಾಲಿ ಕಾವಲ್‌ನಲ್ಲಿರುವ ಮುನಿರತ್ನ ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದೆ.

ಬೆಳ್ಳಂ ಬೆಳಿಗ್ಗೆ ಮುನಿರತ್ನ ಅವರ ನಿವಾಸ, ಕಚೇರಿ ಸೇರಿದಂತೆ ವಿವಿಧೆಡೆ ಎಫ್ಎಸ್ಎಲ್​ ತಂಡದೊಂದಿಗೆ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ.

ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮುನಿರತ್ನ ಅವರನ್ನು ಬಂಧನವಾಗಿತ್ತು.

ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು.ಆದರೆ ಜೈಲಿಂದ ಹರಬಂದ ನಂತರ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾದರು.

ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು.

ಮತ್ತೊಂದು ಪ್ರಕರಣದಲ್ಲಿ ಮಹಿಳೆಯೊಬ್ಬರು ಮುನಿರತ್ನ ತಮ್ಮ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್​ ಮೇಲ್ ಮಾಡಿದ್ದಾರೆ. ಹನಿಟ್ರ್ಯಾಪ್​ ಕೂಡ ಮಾಡಿಸಿದ್ದಾರೆ ಎಂದು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ಬೆನ್ನು ಬಿದ್ದಿರುವ ಎಸ್‌‍ಐಟಿ ಅಧಿಕಾರಿಗಳು, ಮುನಿರತ್ನ ಅವರ ನಿವಾಸ ಮತ್ತು ಅವರ ಸಂಬಂಧಿಕರು, ಸ್ನೇಹಿತರ ಮನೆಗಳ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲಿಸುತ್ತಿದ್ದಾರೆ.