ಪ್ರಶಾಂತ್ ಮಾಡಾಳ್ ಹಾಗೂ ನಾಲ್ವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಲಂಚ ಸ್ವೀಕರಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಹಾಗೂ ಇತರ ನಾಲ್ವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಲೋಕಾಯುಕ್ತ ಪೊಲೀಸರು ಪ್ರಶಾಂತ್ ಅವರ ನಿವಾಸ, ಬನಶಂಕರಿಯಲ್ಲಿರುವ ಕೆಎಸ್‍ಡಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ನಿವಾಸ ಸೇರಿದಂತೆ ಮೂರು ಕಡೆ ಹಾಗೂ ಚನ್ನಗಿರಿಯಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ್ದರು.

ದಾಳಿ ಸಂದರ್ಭದಲ್ಲಿ ಪ್ರಶಾಂತ್ ಅವರ ನಿವಾಸದಲ್ಲಿ 6 ಕೋಟಿ ರೂ. ನಗದು ಪತ್ತೆಯಾಗಿತ್ತು. ಈ ಘಟನೆಯ ನಂತರ ಪ್ರಶಾಂತ್, ಆತನ ಅಕೌಂಟೆಂಟ್ ಹಾಗೂ ಲಂಚ ನೀಡಲು ಪ್ರಶಾಂತ್ ಕಚೇರಿಗೆ ಆಗಮಿಸಿದ್ದ ಮೂವರನ್ನು ಬಂಧಿಸಲಾಗಿತ್ತು.

ಬಂಧಿತ ಆರೋಪಿಗಳನ್ನು ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು.

ಈ ವೇಳೆ ನ್ಯಾಯಾಧೀಶರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು