ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ದೇವೇಗೌಡರ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಕಟುವಾಗಿ ಟೀಕಿಸಿದರು.

ಪಕ್ಷದ ರಾಜ್ಯ ಕಾವೇರಿ ಜೆ ಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎಲ್ಲಾ ಕಡೆ ಗ್ಯಾರಂಟಿ ಕೊಟ್ಟಿದ್ದೇವೆ, ಸಾಧನೆ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡು ಓಡಾಡುತ್ತಿದ್ದಾರೆ. ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಸಿದ್ದರಾಮಯ್ಯ ಸಾಧನೆಯ ಕಿರುನೋಟ ಎಂದು ಮಾಜಿ ಪ್ರಧಾನಿಗಳು ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಕಾವೇರಿ ನೀರಿಗಾಗಿ ಹೋರಾಟ ನಡೆಸಿ ಹೇಮಾವತಿ, ಕಬಿನಿ, ಹಾರಂಗಿ ಅಣೆಕಟ್ಟು ಕಟ್ಟಿಸಿದವನು ನಿಮ್ಮ ಮುಂದೆ ಕೂತಿದ್ದೇನೆ. ಹೇಮಾವತಿಯಲ್ಲಿ ನೀರಿದೆ. ಅಲ್ಲಿನ ಹಳ್ಳಿಗಳಿಗೂ ಆ ನೀರು ಕೊಡಿ, ಬೆಂಗಳೂರಿಗೂ ನೀರು ಕೊಡಿ. ಕೆ.ಆರ್.ಎಸ್ ನಲ್ಲಿ 90 ಅಡಿಗೆ ಬಂದಿದೆ. ಹೇಮಾವತಿ ಯಲ್ಲಿ 23 ಟಿಎಂಸಿ ನೀರಿದೆ. ಜನರಿಗೆ ಕೊಡಲು ನಿಮಗೆ ಸಮಸ್ಯೆ ಏನು? ಜನರು ನೀರಿಗಾಗಿ ಕಣ್ಣೀರು ಹಾಕುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಿದೆ. ಹಾಲಿನ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಮಾರ್ಚ್ 7ರ ಒಳಗೆ ನೋಂದಣಿ ಮಾಡಿಕೊಳ್ಳದ ಟ್ಯಾಂಕರ್ ಗಳನ್ನು ವಶಕ್ಕೆ ಪಡೆಯುತ್ತೇವೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ ಎಂದು ದಿನಪತ್ರಿಕೆಗಳ ಸುದ್ದಿ ತುಣುಕುಗಳನ್ನು ತೋರಿಸುತ್ತಾ ಸರಕಾರದ ಮೇಲೆ ಮಾಜಿ ಪ್ರಧಾನಿಗಳು ಪ್ರಹಾರ ನಡೆಸಿದರು.

ಕುಡಿಯುವ ನೀರಿನ ಸಮಸ್ಯೆ ಎಷ್ಟು ದಿನಗಳಿಂದ ಇದೆ. ಇವರೇ ಅಲ್ಲವೇ ಡಿಸಿಎಂ, ನೀರಾವರಿ ಮಂತ್ರಿ. ಒಂದು ಟ್ಯಾಂಕರ್ ನೀರಿಗೆ ₹2500 ರಿಂದ 3,000 ಕೊಡಬೇಕು. 10 ತಿಂಗಳಲ್ಲಿ‌ ನೀವು ಎಷ್ಟು ಕಡೆ ಪ್ರವಾಸ ಮಾಡಿದ್ದೀರಾ? 20 ದಿನ ಅಧಿವೇಶನ, ಸಭೆ, ಮಂತ್ರಿಗಳ ಮನೆ ಊಟಕ್ಕೆ 4 ದಿನ ಕಳೆದಿರಿ. ಬಾಕಿ ದಿನ ಏನು ಮಾಡಿದಿರಿ ನೀವು? ಗ್ಯಾರಂಟಿ ಯೋಜನೆ ಉಸ್ತುವಾರಿಗೆ ಮಾಜಿ ಮಂತ್ರಿಗಳ ನೇತೃತ್ವದಲ್ಲಿ ಸಮಿತಿ ಮಾಡಿದ್ದೀರಿ. 95 ಜನರಿಗೆ ಕ್ಯಾಬಿನೆಟ್ ದರ್ಜೆ! ಆಹಾ.. ಎಂತಹ ಆಡಳಿತ? ಎಂದು ಮಾಜಿ ಪ್ರಧಾನಿಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಇವತ್ತು ವಿಡಿಯೋ ಕಾನ್ಫರೆನ್ಸ್ ಮಾಡ್ತಿದ್ದೀರಾ. ನೀರಿನ ಬಗ್ಗೆ ಇವತ್ತು ಸಭೆ. ಜನ ನೀರು ಕುಡಿಯುತ್ತಿದ್ದಾರಾ ಅಂತ ಸಭೆ. ಗೌರವಾನ್ವಿತ ಸಿಎಂ, ಕಾಂಗ್ರೆಸ್ ಅಧ್ಯಕ್ಷರು ಸಭೆ ಮಾಡುತ್ತಿದ್ದಾರೆ. ನಾನು ಕೂಗಿದರೇ ಮಂಡ್ಯ, ಹಾಸನ ಅಲ್ಲ. ಚಿಕ್ಕಮಗಳೂರು ವರೆಗೂ ಕೇಳಬೇಕು. ಕೂಗಿ ಅಂದರು. ನಾಚಿಕೆ ಆಗೊಲ್ಲವಾ? ಎಂದು ದೇವೇಗೌಡರು ಕಿಡಿಕಾರಿದರು.

ಶೀಘ್ರವೇ ಟ್ಯಾಂಕರ್ ನೀರಿಗೆ ದರ ನಿಗದಿ ಮಾಡುತ್ತೇವೆ ಅಂತಾರೆ. ನೀರಿನ‌ ಬಗ್ಗೆ ಸಚಿವರಿಗೆ ಕೇಳಿದರೆ ಕುಡಿಯುವ ನೀರು ಕೊಡುವುದು ದೊಡ್ಡ ಸಮಸ್ಯೆ ಅಂತಾರೆ. ಸಚಿವರು ಎಲ್ಲಾ ನೀರಿನ ಟ್ಯಾಂಕರ್ ಗಳು ರಿಜಿಸ್ಟರ್ ಮಾಡಿಕೊಳ್ಳಬೇಕು ಅಂತಾರೆ‌. ಇತ್ತ ನೋಡಿದರೆ ಕುಡಿಯುವ ನೀರಿಗೆ ಜನರು ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ 15 ದಿನಕ್ಕೊಮ್ಮೆ ಮಾತ್ರ ನೀರು ಬರುತ್ತಿದೆ. ಕಾವೇರಿ ನೀರಿಗೆ ಜನರು ಚಾತಕ ಪಕ್ಷಿಯಂತೆ ಕಾಯುದ್ದಾರೆ. ಪಾಪ ಈ ಜನ 5 ಗ್ಯಾರಂಟಿ ಸಿಕ್ಕಿದವು ಎಂದು ಸಂತೋಷವಾಗಿ ಇದ್ದಾರೆ! ಎಂದು ನೀರಿನ ಅಭಾವದ ಬಗ್ಗೆ ದೇವೇಗೌಡರು ಕಳವಳ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು ಹಾಜರಿದ್ದರು.